ಬೆಳಗಾವಿ:
ಹಿಡಕಲ್ ಜಲಾಶಯದ ನೀರನ್ನು ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಒಯ್ಯುವ ವಿಚಾರಕ್ಕೆ ಬೆಳಗಾವಿ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮವಾರ ವಿವಿಧ ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿ ಡಿಸಿ ಕಚೇರಿ ಮುತ್ತಿಗೆಗೆ ಯತ್ನಿಸಿರುವ ಘಟನೆ ನಡೆದಿದೆ.
ಘಟಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬೆಳಗಾವಿ ಜನರ ಜೀವನಾಡಿ ಹಿಡಕಲ್ ಜಲಾಶಯದಿಂದ 0.5 ಟಿಎಂಸಿ ನೀರನ್ನು ಯಾವುದೇ ಕಾರಣಕ್ಕೂ ಹುಬ್ಬಳ್ಳಿ ಧಾರವಾಡ ಕೈಗಾರಿಕೆಗೆ ನೀರು ಬಿಡಬಾರದು ಎಂದು ಒತ್ತಾಯಿಸಿ ಜಿಲ್ಲೆಯ ವಿವಿಧ ಮಠಾಧೀಶರು, ಮೌಲ್ವಿಗಳು, ಚರ್ಚ್ ಮುಖ್ಯಸ್ಥರು, ಕೈಗಾರಿಕೋದ್ಯಮಿಗಳು, ಕನ್ನಡ ಪರ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರು, ದಲಿತ ಸಂಘಟನೆಗಳು, ಪ್ರತಿಭಟನೆ ನಡೆಸಿದರು.

ಕೆಐಎಡಿಬಿ ರೂಪಿಸಿರುವ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಹೋರಾಟಗಾರರು ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ತಡೆದ ಕಾರಣಕ್ಕೆ ಜಿಲ್ಲಾಧಿಕಾರಿ ಕೊಠಡಿ ಎದುರೇ ಧರಣಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಥಳಕ್ಕೆ ಬರುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದರು. ಬಳಿಕ ಸ್ಥಳಕ್ಕೆ ಬಂದ ಅವರಿಗೆ ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ಕ್ಷೇತ್ರಕ್ಕೆ ನೀರು ಒಯ್ಯುವ ಯೋಜನೆಯ ಕಾಮಗಾರಿಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕೆಂದು ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.
ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರ ಗಮನಕ್ಕೆ ತಾರದೇ ಆರಂಭಿಸಿರುವ ಕಾಮಗಾರಿಯನ್ನು ತಕ್ಷಣವೇ ನಿಲ್ಲಿಸಬೇಕು. ಕಾಮಗಾರಿ ನಿಲ್ಲಿಸಲು ಜಿಲ್ಲಾಧಿಕಾರಿಗಳು ಮೀನಾಮೇಷೆ ಎನಿಸುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಬೆಳಗಾವಿಯಲ್ಲಿರುವ ಅನೇಕ ಕೈಗಾರಿಕೆಗಳಿಗೆ ನೀರು ಕೊಡುತ್ತಿಲ್ಲ. ಅದನ್ನು ಬಿಟ್ಟು ಧಾರವಾಡಕ್ಕೆ ನೀರು ಒಯ್ಯುತ್ತಿರುವುದು ಸರಿಯಲ್ಲ. ಹಾಗಾಗಿ, ನಾವೆಲ್ಲಾ ಒಟ್ಟಾಗಿ ಪ್ರತಿಭಟನೆಗೆ ಇಳಿದಿದ್ದೇವೆ. ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಉದ್ಭವಿಸುತ್ತದೆ. ಆದ್ದರಿಂದ ಮುಂದೆ ಆಗುವ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಹೋರಾಟಗಾರರಾದ ಶಂಕರ ಗುಡಸ, ಎನ್.ಆರ್.ಲಾತೂರ್, ಬೀರಪ್ಪ ದೇಶನೂರ, ಆರ್.ಪಿ.ಪಾಟ ಮಲ್ಲೇಶ ಚೌಗುಲೆ, ವಿಕಾಸ ಕಲಘಟಗಿ ಸೇರಿ ಮತ್ತಿತರರು ಇದ್ದರು.